ಜಿಲ್ಲೆಯ 817 ಕುಟುಂಬಗಳ 2,866 ಜನರು ಪರಿಹಾರ ಕೇಂದ್ರಕ್ಕೆ ಸ್ಥಳಾಂತರ 


ಮಡಿಕೇರಿ ಆ.10 :-ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಕಾವೇರಿ, ಲಕ್ಷ್ಮಣ ತೀರ್ಥ ನದಿ ಸೇರಿದಂತೆ ಹಲವು ಜಲಪಾತಗಳು, ತೊರೆ, ಹಳ್ಳ, ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಸದ್ಯ ಲಭ್ಯವಿರುವ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ 58 ಪ್ರದೇಶಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನ 26, ವಿರಾಜಪೇಟೆ ತಾಲ್ಲೂಕಿನಲ್ಲಿ 16, ಸೋಮವಾರಪೇಟೆ ತಾಲ್ಲೂಕಿನಲ್ಲಿ 3, ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5, ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಒಟ್ಟು 58 ಪ್ರವಾಹ ಪೀಡಿತ ಪ್ರದೇಶಗಳೆಂದು ಗರುತಿಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸುಮಾರು 250 ಕ್ಕೂ ಹೆಚ್ಚು ಜನರು ಹಾಗೂ 20 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. 8 ಜಾನುವಾರುಗಳನ್ನು ಗೋ ಶಾಲೆಗೆ ಸ್ಥಳಾಂತರಿಸಲಾಗಿದೆ. ರಕ್ಷಣೆ ಕಾರ್ಯದಲ್ಲಿ ಎನ್‍ಡಿಆರ್‍ಎಫ್, ಭಾರತೀಯ ಸೇನೆ, ಜನರಲ್ ತಿಮ್ಮಯ್ಯ ಸಾಹಸ ಅಕಾಡೆಮಿ, ಪೊಲೀಸ್ ಇಲಾಖೆ, ಕಂದಾಯ ಹಾಗೂ ರಿವರ್ ರ್ಯಾಪ್ಟಿಂಗ್ ಅಸೋಷಿಯೇಷನ್ ಸಹಕಾರ, ಗ್ರಾಮ ಪಂಚಾಯಿತಿ ಹಾಗೂ ಪಶುಪಾಲನಾ ಇಲಾಖೆ ಸಹಕಾರದಲ್ಲಿ ರಕ್ಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 34 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 817 ಕುಟುಂಬಗಳ 2,866 ಸಂತ್ರಸ್ತರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಬರೆ ಹಾಗೂ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಸುಮಾರು 17 ಕಡೆಗಳಲ್ಲಿ ಸಾರಿಗೆ ಸಂಚಾರ ವ್ಯತ್ಯಯ ಉಂಟಾಗಿದೆ. ಅತೀವೃಷ್ಟಿಯಿಂದಾಗಬಹುದಾದ ತೊಂದರೆಯನ್ನು ಎದುರಿಸಲು ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದು, ಜಿಲ್ಲೆಯಾದ್ಯಂತ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿದ್ದಾರೆ. ತುರ್ತು ಸಂದರ್ಭ ಎದುರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಮಡಿಕೇರಿ ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳು ಮೊಕ್ಕಾಂ ಹೂಡಿದ್ದು, ತುರ್ತು ಸಂದರ್ಭಗಳಲ್ಲಿ ನೆರವಿಗೆ ಬರಲಿದೆ. ಅಲ್ಲದೆ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ದಿನದ 24 ಗಂಟೆ ಅವಧಿಯಲ್ಲಿ ನಿಯಂತ್ರಣಾ ಕೊಠಡಿಗಳು ಕಾರ್ಯನಿರ್ವಹಿಸುತ್ತಿವೆ. ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ವಾಟ್ಸಪ್‍ನಲ್ಲಿಯೂ ಸಹ ಪ್ರಕೃತಿ ವಿಕೋಪ ಸಂಬಂಧಿಸಿದ ದೂರುಗಳನ್ನು ಸ್ವೀಕರಿಸಲಾಗುತ್ತಿದ್ದು, ತುರ್ತು ಕ್ರಮ ವಹಿಸಲಾಗುತ್ತದೆ. ಈ ಸಂಬಂಧ ಸಾರ್ವಜನಿಕರು ಜಿಲ್ಲಾಧಿಕಾರಿಯವರ ನಿಯಂತ್ರಣ ಕೊಠಡಿ ಸಂಖ್ಯೆ : 08272-221077, 8550001077 ನ್ನು ಸಂಪರ್ಕಿಸಬಹುದಾಗಿದೆ.
Previous Post
Next Post

0 Post a Comment: